ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.
2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದ ರಾಹುಲ್ ದ್ರಾವಿಡ್ ಅವರ ಅವಧಿ 2024ರ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಅಂತ್ಯವಾಗಿದೆ. ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ.
ಇನ್ನು ಟೀಂ ಇಂಡಿಯಾದ ಕೋಚ್ ಆಗಿ ಬಿಸಿಸಿಐ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಗೌತಮ್ ಗಂಭೀರ್ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ಭಾರತವು ನನ್ನ ಗುರುತಾಗಿದೆ. ಮತ್ತು ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಜೀವನದ ದೊಡ್ಡ ಅವಕಾಶ. ಬೇರೆ ಟೋಪಿ ಧರಿಸಿದ್ದರೂ ನಾನು ಹಿಂತಿರುಗಿದ್ದಕ್ಕೆ ನನಗೆ ಗೌರವವಿದೆ. ಆದರೆ ನನ್ನ ಗುರಿ ಮೊದಲಿನಂತೆಯೇ ಇದೆ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತೆ ಮಾಡುವುದು. ಬ್ಲ್ಯೂ ಬಾಯ್ಸ್ 1.4 ಬಿಲಿಯನ್ ಭಾರತೀಯರ ಕನಸುಗಳನ್ನು ನನಸಾಗಿಸುತ್ತಾರೆ ಮತ್ತು ಈ ಕನಸುಗಳನ್ನು ನನಸಾಗಿಸಲು ನಾನು ನನ್ನ ಶಕ್ತಿಯಿಂದ ಎಲ್ಲವನ್ನೂ ಮಾಡುತ್ತೇನೆ ಎಂದು ವಿಶ್ವಾಸದ ಮಾತುಗಳನ್ನು ಹಂಚಿಕೊಂಡಿದ್ದಾರೆ.