ವಿಟ್ಲ: ದೆಹಲಿಯ ಕೆಂಪುಕೋಟೆಯಲ್ಲಿ ಆ.15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಕರ್ನಾಟಕದ 6 ಪಂಚಾಯತ್ ಮಹಿಳಾ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂ. ಅಧ್ಯಕ್ಷೆ ನೆಫೀಸಾ ಅವರನ್ನು ಆಯ್ಕೆ ಮಾಡಲಾಗಿರುವುದು ವಿಶೇಷ.
ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಇವರು ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದರು.
ಉಪಾಧ್ಯಕ್ಷರಾಗಿದ್ದಾಗ ಅವರು ವಾಹನ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ವಿಶೇಷವಾಗಿ ಗುರುತಿಸಲ್ಪಟ್ಟಿದ್ದರು. ಅವರ ಈ ಸೇವೆಯನ್ನು ಗುರುತಿಸಿ ವರ್ಲ್ಡ್ ಯೂತ್ ಸ್ಕಿಲ್ ಡೇ ಅಂಗವಾಗಿ ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಮುಖ್ಯಮಂತ್ರಿ ಗೌರವಿಸಿದ್ದರು.
ಪಂಚಾಯತ್ ವ್ಯಾಪ್ತಿಯ ರಸ್ತೆ, ಎಡಬ್ಲ್ಯೂಸಿ, ನರೇಗ ಇತ್ಯಾದಿ ಅಭಿವೃದ್ಧಿ ಯೋಜನೆಗಳಲ್ಲೂ ಅವರು ಶ್ರಮಿಸಿದ್ದಾರೆ. ಅವರು ಅನೇಕ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ಕೊಡುಗೆ ನೀಡಿದ್ದರು. ರಾಜ್ಯ ಇನ್ಸ್ಟಿಟ್ಯೂಟ್ ಆಫ್ ರೂರಲ್ ಡೆವೆಲಪ್ಮೆಂಟ್ ಇನ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ನ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ.