Friday, June 27, 2025

ನಾಡಪ್ರಭು ಕೆಂಪೇಗೌಡರು ಬಂಧನದಲ್ಲಿದ್ದ ಸೆರೆಮನೆ ಪತ್ತೆ..! ಆಧುನಿಕ ಬೆಂಗಳೂರಿನ ಸಂಸ್ಥಾಪಕ ಸೆರೆ ಮನೆ ಸೇರಿದ್ಯಾಕೆ?

ಆಧುನಿಕ ಬೆಂಗಳೂರಿನ ಸಂಸ್ಥಾಪಕ ಕೆಂಪೇಗೌಡ ಅವರು ಬಂಧನದಲ್ಲಿದ್ದ ಸೆರೆಮನೆ ಪತ್ತೆಯಾಗಿದ್ದು ಇತಿಹಾಸಕಾರರ ಖುಷಿ ಇಮ್ಮಡಿಗೊಳಿಸಿದೆ. ಹಲವಾರು ವರ್ಷಗಳಿಂದ ನಡೆಸಿದ ನಿರಂತರ ಶೋಧನೆಯ ಫಲವಾಗಿ ಸೆರೆ ಮನೆ ಪತ್ತೆಯಾಗಿದೆ. ಐದು ವರ್ಷಗಳ ಕಾಲ ಸೆರೆಮನೆ ವಾಸ ಅನುಭವಿಸಿದ್ದ ನಾಡಪ್ರಭು ಕೆಂಪೇಗೌಡರ ಅಪರಾಧ ಮತ್ತು ಶಿಕ್ಷೆ ಸಂಬಂಧಿಸಿದ ವಿಷಯಗಳು ಮೈಸೂರ್ ಗ್ಯಾಜೆಟಿಯರ್‌ನಲ್ಲಿ ಉಲ್ಲೇಖಿಸಲಾಗಿತ್ತು.

ನಿಖರ ಪುರಾವೆಗಳನ್ನು ಆಧರಿಸಿಕೊಂಡು ಸಂಶೋಧಕರ ತಂಡ ಕೆಂಪೇಗೌಡ ಅವರು ಬಂಧನದಲ್ಲಿದ್ದ ಸೆರೆಮನೆ ಪತ್ತೆ ಕಾರ್ಯಕ್ಕೆ ಹಲವಾರು ವರ್ಷಗಳಿಂದ ಪ್ರಯತ್ನ ಬರುತ್ತಿದೆ. ಅಂತಿಮವಾಗಿ ಆನೆಗೊಂದಿಯ ಸೆರೆಮನೆ ಪತ್ತೆಯಾಗಿದೆ ಎಂದು ಇತಿಹಾಸ ಸಂಶೋಧಕ ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ.

ಹಲವಾರು ವರ್ಷಗಳಿಂದ ನಡೆಸಿದ ನಿರಂತರ ಶೋಧನೆಯಿಂದಾಗಿ ಅಂತಿಮವಾಗಿ ಆನೆಗೊಂದಿಯ ಜಿಂಜರ ಬೆಟ್ಟದಲ್ಲಿ ಸೆರೆಮನೆ ಪತ್ತೆಯಾಗಿದೆ.

ಯಾಕಾಗಿ ಸೆರೆಮನೆ ವಾಸ?
ವಿಜಯನಗರ ಸಾಮ್ರಾಜ್ಯದ ನಿಷ್ಠಾವಂತ ಮಾಂಡಲಿಕನಾಗಿದ್ದ ಯಲಹಂಕ ನಾಡಪ್ರಭು ಕೆಂಪೇಗೌಡರು ಅಳಿಯ ರಾಮರಾಯನ ಕಾಲದಲ್ಲಿ ತನ್ನ ರಾಜ್ಯದಲ್ಲಿ ಉಂಟಾದ ಆರ್ಥಿಕ ದುಸ್ಥಿತಿ ಸುಧಾರಿಸಲು ಮತ್ತು ಪ್ರಜೆಗಳ ಹಿತರಕ್ಷಣೆಗಾಗಿ ಸಾಮ್ರಾಟನ ಅನುಮತಿ ಪಡೆಯದೆ ಬೈರೇಶ್ವರ ಹೆಸರಿನ ಸ್ವಂತ ನಾಣ್ಯಗಳನ್ನು ಚಲಾಯಿಸಿದನು.

ಇದರಿಂದ ಕೆರಳಿದ ಅಳಿಯ ರಾಮರಾಯ ಕೆಂಪೇಗೌಡನನ್ನು ರಾಜಧಾನಿ ವಿಜಯನಗರದಲ್ಲಿ ಜರುಗುತ್ತಿದ್ದ ದಸರಾ ಉತ್ಸವಕ್ಕೆ ಆಹ್ವಾನಿಸಿ, ಬಂಧಿಸಿ ಆನೆಗೊಂದಿ ಸೆರೆಮನೆಗೆ ತಳ್ಳುತ್ತಾನೆ ಎಂದು ಅವರು ಹೇಳಿದ್ದಾರೆ. ಕೆಂಪೇಗೌಡರು 1560ರಿಂದ ಐದು ವರ್ಷಗಳ ಕಾಲ ಆನೆಗೊಂದಿ ಸೆರೆಮನೆಯಲ್ಲಿದ್ದರು. ಪ್ರಸಕ್ತ ಶಕೆ 1565ರಲ್ಲಿ ಭಾರಿ ದಂಡ ತೆತ್ತು ಬಿಡುಗಡೆಗೊಂಡರು. ಈ ಸಂಗತಿಯನ್ನು ಮೈಸೂರ್ ಗ್ಯಾಜೆಟಿಯರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.

ಸೆರೆಮನೆಗಾಗಿ ಹುಡುಕಾಟ
ಕೆಂಪೇಗೌಡರು ಬಂಧನದಲ್ಲಿದ್ದ ಸೆರೆಮನೆ ಹುಡುಕಾಟ ನಡೆಸಲಾಗಿತ್ತು. ಆನೆಗೊಂದಿಯಲ್ಲಿ ಪ್ರಚಲಿತವಾಗಿರುವ ಮೌಖಿಕ ಹೇಳಿಕೆಗಳು ಕೆಂಪೇಗೌಡರು ಜಿಂಜರ ಬೆಟ್ಟದಲ್ಲಿ ಬಂಧನದಲ್ಲಿದ್ದರು ಎಂಬುದನ್ನು ಸೂಚಿಸುತ್ತಿದ್ದವು. ಆ ಮೌಖಿಕ ಮಾಹಿತಿ ಅನುಲಕ್ಷಿಸಿ ಬೆಟ್ಟವನ್ನು ಅಮೂಲಾಗ್ರವಾಗಿ ಪರಿಶೋಧಿಸಿದಾಗ ಬೆಟ್ಟದ ಮೇಲೆ ವಿಶಾಲವಾದ ಜಾಗದಲ್ಲಿ ಸುತ್ತಲೂ ರಕ್ಷಣಾ ಗೋಡೆಗಳು, ಅಲ್ಲಲ್ಲಿ ಕಾವಲು ಗೋಪುರಗಳು, ಕಾವಲುಗಾರರ ಮನೆಗಳು, ಸೈನಿಕರ ವಸತಿಗಳು, ಭದ್ರತಾ ಕಟ್ಟಡ (ಸೆರೆಮನೆ), ಕಣಜ ಮತ್ತು ನೈಸರ್ಗಿಕ ನೀರಿನ ಕೊಳಗಳು ಕಂಡು ಬಂದವು ಎಂದು ಅವರು ಹೇಳಿದ್ದಾರೆ.

Related Articles

Latest Articles