ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಅ.21ರ ಸೋಮವಾರದಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
1957ರಲ್ಲಿ ಜನಿಸಿದ್ದ ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.