Saturday, June 28, 2025

ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ – ಗಂಭೀರ ಗಾಯ

ಮಂಡ್ಯದ ನಾಗಮಂಗಲ ಗಲಭೆ ಬಳಿಕ ಇದೀಗ ಕುಂದಾನಗರಿ ಬೆಳಗಾವಿಯಲ್ಲಿ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಹಲ್ಲೆ ನಡೆದಿದೆ. ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಕೂಡಲೇ ಪೊಲೀಸರು ಬೆನ್ನುಹತ್ತಿ ಹಿಡಿದಿದ್ದಾರೆ.

ಗಣೇಶೋತ್ಸವ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್​ ಆಗಿದ್ದು ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ.

ಬೆಳಗಾವಿಯ ಚರ್ಚ್​ ಗಲ್ಲಿಯ ಯುವಕರ ಗ್ಯಾಂಗ್​ನಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್​ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಚೇಸ್​ ಮಾಡಿ ಹಿಡಿದಿದ್ದಾರೆ. ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ಸೆರೆಯಾಗಿದ್ದಾರೆ. ರೋಪಿಗಳು ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ.

ವಶಕ್ಕೆ ಪಡೆದ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles