ಮಡಿಕೇರಿ : ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಸೆ. 11ರ ಸಂಜೆ ನಡೆದಿದೆ.
ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಬೆಳಗ್ಗೆ ಎಂದಿನಂತೆ ಬ್ಯಾಂಕ್ ಶಾಖೆಗೆ ಕೆಲಸಕ್ಕೆ ಬಂದಿದ್ದ ಅವರು, ಲಾಕರ್ ರೂಮಿಗೆ ಹೋಗಿದ್ದಾರೆ. ಅಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಆರಂಭಿಸುವ ಮುನ್ನವೇ ಈ ಘಟನೆ ನಡೆದಿದೆ. ಸಿಬ್ಬಂದಿಗಳು ಕಛೇರಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.