ಮಹಿಳೆಯರಿಬ್ಬರ ಕುತ್ತಿಗೆಯಿಂದ ಚಿನ್ನದ ಎಗರಿಸಿದ ಪ್ರಕರಣ ಹಾಗೂ ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಕ್ಕೆ ಬೇಕಾಗಿದ್ದ ಇಬ್ಬರನ್ನು ಮೂಡುಬಿದಿರೆ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್, ಯಾನೆ ಹಬ್ಬಿ ಯಾನೆ ಚೆಂಬುಗುಡ್ಡೆ, ಹಬ್ಬಿ(42) ಮತ್ತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಈ ಮೊದಲು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಬಂಟ್ವಾಳ, ಜೋಡು ಮಾರ್ಗ ನಿವಾಸಿ ಉಮ್ಮರ ಸಿಯಾಫ್ ಯಾನೆ ಚಿಯಾ(29) ಬಂಧಿತ ಆರೋಪಿಗಳು.

ಇದೇ ಆಗಸ್ಟ್ 15ರಂದು ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದ ಬಳಿ ನಿರ್ಮಾಲ ಪಂಡಿತ್(70) ಎಂಬವರ ಕುತ್ತಿಗೆಯಿಂದ ಸುಮಾರು 24 ಗ್ರಾಂ ಮೌಲ್ಯದ ಚಿನ್ನದ ಸರವನ್ನು ಹಾಗೂ ಸೆ. 02 ರಂದು ಮೂಡಬಿದ್ರೆ ತಾಲೂಕು ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಪ್ರೇಮಾ (82) ಎಂಬವರ ಕುತ್ತಿಗೆಯಿಂದ ಸುಮಾರು 3 ಪವನ್ ತೂಕದ ಚಿನ್ನದ ಸರವನ್ನು ಬಂಧಿತ ಆರೋಪಿಗಳು ಸ್ಕೂಟರ್ ನಲ್ಲಿ ಬಂದು ಕಸಿದುಕೊಂಡು ಹೋಗಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ಪ್ರಕರಣಗಳ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಕಳವು ಆಗಿರುವ ಸ್ಕೂಟರ್ ಆಗಿರುತ್ತದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಚಿನ್ನಾಭರಣಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ, ದಸ್ತಗಿರಿಯಾಗಿರುವ 1 ನೇ ಆರೋಪಿ ಹಬೀಬ್ ಹಸನ್, ಯಾನೆ ಹಬ್ಬಿ ಯಾನೆ ಚೆಂಬುಗುಡ್ಡೆ ಹಬ್ಬಿ ವಿರುದ್ಧ ವಿವಿಧ ಠಾಣೆಗಳಲ್ಲಿ ಈವರೆಗೆ ಸುಮಾರು 42 ಪ್ರಕರಣಗಳು ದಾಖಲಾಗಿರುತ್ತದೆ.