Friday, June 27, 2025

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಎನ್‌ಐಎಗೆ ವರ್ಗಾಯಿಸಲು ಕಾಂಗ್ರೆಸ್ ನಿರಾಕರಿಸಿರುವುದು ಗಂಭೀರ ಪ್ರಶ್ನೆ ಹುಟ್ಟುಹಾಕಿದೆ – ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿದೆ. ಎನ್‌ಐಎಗೆ ವಹಿಸಲು ಹಿಂದೇಟು ಹಾಕುತ್ತಿರುವುದು ಆತಂಕಕ್ಕೆ ಹಾಗೂ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ನಡೆಯು ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ (ಇಸ್ಲಾಮಿಕ್) ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನದ ಪ್ರತಿಬಿಂಬಿವಾಗಿದೆ ಎಂದರು.‌

ಸ್ಪೀಕರ್, ಗೃಹ ಸಚಿವರು ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರ ಸಂಘಟಿತ ಪ್ರಯತ್ನದಂತೆ, ಈ ಭೀಕರ ಹತ್ಯೆ ಪ್ರಕರಣವನ್ನು ಅತ್ಯಂತ ತರಾತುರಿಯಲ್ಲಿ “ಸಾಮಾನ್ಯ ಅಪರಾಧ ಪ್ರಕರಣ” ದಂತೆ ಹಗುರವಾಗಿ ಪರಿಗಣಿಸಿ ಕೈತೊಳೆದುಕೊಂಡಿರುವುದು ಹಾಗೂ ತನಿಖೆ ಆರಂಭಕ್ಕೂ ಪೂರ್ವದಲ್ಲೇ, ಈ ಘಟನೆಯಲ್ಲಿ ಯಾವುದೇ ಸೈದ್ಧಾಂತಿಕ ಉದ್ದೇಶ ಹಾಗೂ ಇಸ್ಲಾಮಿಕ್ ಮೂಲಭೂತವಾದಿಗಳ ಪಾತ್ರವನ್ನು ನಿರಾಕರಿಸಿರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ನ್ಯಾಯೋಚಿತ ತನಿಖೆಗೆ ಬೆಂಬಲ ನೀಡಬೇಕಾಗಿದ್ದ ಸ್ಪೀಕರ್, ತನಿಖೆ ಆರಂಭಕ್ಕೂ ಮೊದಲೇ ತನಿಖೆಯ ಹಾದಿ ತಪ್ಪಿಸುವಂತೆ, ಪ್ರಸ್ತುತ ಆರೋಪಿಗಳಾಗಿರುವ ವ್ಯಕ್ತಿಗಳನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡಿ ಕ್ಲೀನ್ ಚಿಟ್ ಕೊಟ್ಟಿರುವುದು ಅಚ್ಚರಿ ಮತ್ತು ಅಘಾತಕಾರಿಯಾಗಿದೆ‌ ಎಂದರು.

Related Articles

Latest Articles